ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರದ ಮುಕ್ತ ವ್ಯಾಪಾರದ ಒಪ್ಪಂದದ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ಸುದ್ದಿ ಯಾಗಿದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್.ಸಿ.ಇ.ಪಿ) ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದ್ಧಾರೆ. ಕೇಂದ್ರ ಸರ್ಕಾರದ ಈ ಪ್ರಯತ್ನವು ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ ಎಂದವರು ಎಚ್ಚರಿಸಿದ್ಧಾರೆ. ಇಂದು ಸಾಲು ಸಾಲಾಗಿ ಟ್ವೀಟ್​ಗಳನ್ನು ಮಾಡಿರುವ ಅವರು ಮುಕ್ತ ವ್ಯಾಪಾರ ನೀತಿಯಿಂದ ಕೃಷಿ ಕ್ಷೇತ್ರಕ್ಕೆ ಹೇಗೆ ಪೆಟ್ಟು ಬೀಳುತ್ತದೆಂದು ಸಂಪೂರ್ಣವಾಗಿ ವಿವರಿಸಿ ಟ್ವೀಟ್ ಮಾಡಿದ್ದಾರೆ. 


ಯುಪಿಎ ಸರ್ಕಾರ ಆರ್. ಸಿ. ಇ. ಪಿ ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲ ಬದಲಾವಣೆಗಳನ್ನ ಬಯಸಿದ್ದು ನಿಜ. ಆದರೆ, ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.  ಆರ್. ಸಿ. ಇ. ಪಿ ಅಡಿಯಲ್ಲಿ ಹಾಲು ಉತ್ಪನ್ನಗಳ ಆಮದು ಮಾಡಿಕೊಳ್ಳುವುದು ದೇಶದ ಹೈನುಗಾರಿಕೆ ಕ್ಷೇತ್ರಕ್ಕೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, “ಸುಮಾರು 10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ.

ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದರಿಂದ ರಾಜ್ಯದ ರೈತರಿಗೂ ಅತ್ಯಂತ ಅಪಾಯಕಾರಿ. ನ್ಯೂಜಿಲೆಂಡ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರ ಹಾಲು ಆಮದಿಗೆ ಅವಕಾಶ ನೀಡುವ ಮುಕ್ತ ವ್ಯಾಪಾರ ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ” ಎಂದು ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ಕ್ಷೀರಧಾರೆ ಯೋಜನೆ ಮತ್ತು ಶಾಲಾ ಮಕ್ಕಳನ್ನ ಆರೋಗ್ಯವಂತರನ್ನಾಗಿ ಮಾಡಲು ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಈಗ ಮೋದಿ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧದ ಗುಡುಗಿದ್ದಾರೆ. 


మరింత సమాచారం తెలుసుకోండి: